ಸಿಟಿ ರೌಂಡ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ: ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ?

ಬೆಂಗಳೂರು: ನಗರದ ರಸ್ತೆ ಗುಂಡಿ ಸಮಸ್ಯೆ ಹಾಗೂ ಮೂಲಸೌಕರ್ಯಗಳ ಕುರಿತು ಖುದ್ದು ಪರಿಶೀಲನೆ ನಡೆಸಲು ಸಿಟಿ ರೌಂಡ್ಸ್ ಕೈಗೊಂಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಪಗಳನ್ನು ಕಂಡ ಕೂಡಲೇ ಅಧಿಕಾರಿಗಳಿಗೆ 'ಕ್ಲಾಸ್' ತೆಗೆದುಕೊಂಡಿದ್ದಾರೆ. ರಸ್ತೆ ಗುಂಡಿಗಳನ್ನು ಮತ್ತು ಅನಧಿಕೃತವಾಗಿ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ, ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ತ್ಯಾಜ್ಯ ಸುರಿದವರಿಗೆ ದಂಡ, ವಾಹನ ಸೀಜ್‌ಗೆ ಸೂಚನೆ

ಮಾರ್ಗಮಧ್ಯದಲ್ಲಿ, ರಿಂಗ್ ರಸ್ತೆಯ ಬದಿಯಲ್ಲಿ ಸಿಸಿ ಕ್ಯಾಮರಾ ಇಲ್ಲದ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯವನ್ನು ಸುರಿದಿರುವುದನ್ನು ಸಿಎಂ ಸಿದ್ದರಾಮಯ್ಯ ಗಮನಿಸಿದರು. ತಕ್ಷಣ ತಮ್ಮ ವಾಹನ ಚಾಲಕ ನವೀನ್ ಅವರಿಗೆ ಕಾರು ನಿಲ್ಲಿಸುವಂತೆ ಸೂಚಿಸಿ, ಸ್ಥಳಕ್ಕಿಳಿದು ಪರಿಶೀಲನೆ ನಡೆಸಿದರು.

"ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ತಕ್ಷಣ ಪತ್ತೆ ಹಚ್ಚಿ, ಅವರ ವಾಹನವನ್ನು ಸೀಜ್ ಮಾಡಿ, ಕೇಸು ದಾಖಲಿಸುವಂತೆ" ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬಳಿಕ, ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ಉದ್ದೇಶಿಸಿ, "ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗುವುದಿಲ್ಲವಾ?" ಎಂದು ಖಾರವಾಗಿ ಪ್ರಶ್ನಿಸಿ, ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.

ಮೆಟ್ರೋ ಕಾಮಗಾರಿ ನಿರ್ಲಕ್ಷ್ಯ, ವೈಟ್ ಟಾಪಿಂಗ್ ರಸ್ತೆ ದುರಸ್ತಿ

ಸಂಚಾರ ರೌಂಡ್ಸ್‌ ವೇಳೆ ಮೆಟ್ರೋ ಕಾಮಗಾರಿ ನಡೆಯುವ ಸ್ಥಳಗಳಲ್ಲಿನ ಸಮಸ್ಯೆಗಳನ್ನು ಅಧಿಕಾರಿಗಳು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಮೆಟ್ರೋ ಕಾಮಗಾರಿಯಿಂದಾಗಿ ಸರ್ವೀಸ್ ರಸ್ತೆಗಳನ್ನು ನಿರ್ಲಕ್ಷಿಸಿರುವುದು. ರಸ್ತೆ ಬದಿಯಲ್ಲಿ ನೀರು ನಿಲ್ಲುವಂತೆ ಮಾಡಿರುವುದು. ನೀರು ಸರಾಗವಾಗಿ ಹರಿಯಲು ಇರುವ ವ್ಯವಸ್ಥೆಯನ್ನು ಮುಚ್ಚಿಸಿರುವುದು. ನಿರ್ಮಿಸಲಾದ ವೈಟ್ ಟಾಪಿಂಗ್ ರಸ್ತೆಯನ್ನು ಹಾಳು ಮಾಡಿರುವ ಲೋಪದೋಷಗಳನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ, ತಕ್ಷಣವೇ ರಸ್ತೆಗಳ ದುರಸ್ತಿಗೆ ಹಾಗೂ ಸರ್ವೀಸ್ ರಸ್ತೆಗಳ ಸೂಕ್ತ ನಿರ್ವಹಣೆಗೆ ನಿರ್ದಿಷ್ಟ ಸೂಚನೆಗಳನ್ನು ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು