ಪ್ರಿಯಾಂಕ್ ಖರ್ಗೆಗೆ ಯತ್ನಾಳ್ ಟಾಂಗ್
ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಕುರಿತು 'ಎಕ್ಸ್' (X) ನಲ್ಲಿ ಪೋಸ್ಟ್ ಮಾಡಿರುವ ಶಾಸಕ ಯತ್ನಾಳ್, ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಆರ್ಎಸ್ಎಸ್ ಶಾಖೆಗಳು, ಪಥಸಂಚಲನ ಮತ್ತು ಬೈಠಕ್ಗಳನ್ನು ನಿಷೇಧಿಸಬೇಕು ಎಂದು ಕರೆ ನೀಡಿರುವುದನ್ನು ಖಂಡಿಸಿದ್ದಾರೆ.
"ಜಗತ್ತಿನ ಅತ್ಯಂತ ದೊಡ್ಡ ಸ್ವಯಂಸೇವಕರ ಪಡೆಯನ್ನು ಹೊಂದಿರುವ ಆರ್.ಎಸ್.ಎಸ್. ನಿಷೇಧಕ್ಕೆ ಕರೆ ಕೊಟ್ಟಿರುವುದು ಇವರ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ" ಎಂದು ತೀಕ್ಷ್ಣವಾಗಿ ಟೀಕಿಸಿದ್ದಾರೆ.
ಆರ್ಎಸ್ಎಸ್ನ ಸಾಮಾಜಿಕ ಸೇವಾ ಕಾರ್ಯಗಳನ್ನು ಉಲ್ಲೇಖಿಸಿದ ಯತ್ನಾಳ್, ಸಂಘದ ಮಹತ್ವವನ್ನು ವಿವರಿಸಿದ್ದಾರೆ. "ಪ್ರಕೃತಿ ವಿಕೋಪ, ರೈಲು ದುರಂತ, ಕೋವಿಡ್, ಅಪಘಾತಗಳು, ಭೂಕಂಪ, ನೆರೆಯಾದಾಗ ನೊಂದವರಿಗೆ ಮೊದಲು ಆಸರೆಯಾಗುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರು," ಎಂದು ಹೇಳಿದ್ದಾರೆ.
"ಸೇವಾತತ್ಪರತೆ, ಸಮಾಜ ಸೇವೆ, ರಾಷ್ಟ್ರಪ್ರೇಮದ ಬಗ್ಗೆ ಜಾಗೃತಿ, ಶಿಸ್ತಿಗೆ ಮತ್ತೊಂದು ಹೆಸರೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ" ಎಂದಿರುವ ಅವರು, ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಸ್ವಾರ್ಥ ಸೇವೆ ನೀಡುವ ಏಕೈಕ ಸಂಘಟನೆ ಆರ್.ಎಸ್.ಎಸ್. ಎಂದು ಬಣ್ಣಿಸಿದ್ದಾರೆ. ಅಲ್ಲದೆ, "ಸಂಘವನ್ನು ನಿಷೇಧ ಮಾಡಲು ಯಾರಿಂದಲೂ ಸಾಧ್ಯವಾಗಿಲ್ಲ. ವಿರೋಧಿಗಳು ಪ್ರೀತಿಸುವ, ಗೌರವಿಸುವ ಜಗತ್ತಿನ ಏಕೈಕ ಸಂಘಟನೆಯೇ ಆರ್ಎಸ್ಎಸ್" ಎಂದು ಅಭಿಪ್ರಾಯಪಟ್ಟಿದ್ದಾರೆ.
ಎಸ್.ಡಿ.ಪಿ.ಐ. ಮತ್ತು ಮದರಸ ನಿಷೇಧಕ್ಕೆ ಆಗ್ರಹ
ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು, ಸಚಿವ ಪ್ರಿಯಾಂಕ್ ಖರ್ಗೆ ಅವರು ತಮ್ಮ ಸ್ವಕ್ಷೇತ್ರವಾದ ಕಲ್ಬುರ್ಗಿಯನ್ನು ಅಭಿವೃದ್ಧಿಪಡಿಸಲು ಶ್ರಮಿಸಲಿ ಎಂದು ಯತ್ನಾಳ್ ಸಲಹೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಅವರು, "ನಿಷೇಧಗೊಳಿಸಬೇಕಾಗಿದ್ದರೆ ಕೂಡಲೇ ಎಸ್.ಡಿ.ಪಿ.ಐ. (SDPI) ನಂತಹ ದೇಶ ವಿರೋಧಿ ಸಂಘಟನೆಗಳನ್ನು ನಿಷೇಧಿಸಲಿ. ಬಕ್ರೀದ್ ಸೇರಿದಂತೆ ಇತರ ಹಬ್ಬಗಳಲ್ಲಿ ಆಗುವ ಪ್ರಾಣಿಬಲಿಯನ್ನು ನಿಷೇಧಿಸಲಿ. ಅಲ್ಲದೆ, ದ್ವೇಷ ಮತ್ತು ಬೇರೆ ಧರ್ಮಗಳ ಬಗ್ಗೆ ತಪ್ಪು ವಿಚಾರಗಳನ್ನು ಕಲಿಸುವ ಮದರಸಗಳನ್ನು ನಿಷೇಧ ಮಾಡಲಿ" ಎಂದು ಸರಣಿ ಆಗ್ರಹಗಳನ್ನು ಮಾಡಿದ್ದಾರೆ.
"ಸಂಘದ ನಿಷೇಧ ಕನಸಿನ ಮಾತು" ಎಂದು ಸ್ಪಷ್ಟಪಡಿಸಿದ ಯತ್ನಾಳ್, ಕಾಂಗ್ರೆಸ್ನ ಈ ಹೇಳಿಕೆಯು ಕೇವಲ ರಾಜಕೀಯ ಪ್ರೇರಿತ ಎಂದು ಟೀಕಿಸಿದ್ದಾರೆ.
